ದೇಶ ವಿದೇಶ

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಪ್ರಧಾನಿ ಮೋದಿ, ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಪಟ್ಟು; ಪ್ರಧಾನಿ ನಿವಾಸ ಮುತ್ತಿಗೆ ಯತ್ನ, ಸಿಎಂ ಡಿಕೆಶಿ ಸಾಥ್!




ನವದೆಹಲಿ: ದೇಶದ ಶಿಕ್ಷಣ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಯುವ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಪ್ರಹಾರ ಹಾಗೂ ದೌರ್ಜನ್ಯವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಬೀದಿಗಿಳಿದಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಮಂತ್ರಿಗಳ ಅಧಿಕೃತ ನಿವಾಸದತ್ತ ಬೃಹತ್ ಮೆರವಣಿಗೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು ಎಂದು ನಾಯಕರು ಆಗ್ರಹಿಸಿದರು.

ಈ ಪ್ರತಿಭಟನಾ ಮೆರವಣಿಗೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕರ್ನಾಟಕದ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು.

 ರಾಹುಲ್ ಗಾಂಧಿ ತೀವ್ರ ಆಕ್ರೋಶ - 'ಎಕ್ಸ್' ಪೋಸ್ಟ್:

ಪ್ರತಿಭಟನೆಯ ಬಳಿಕ ಎಕ್ಸ್ (X) ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ರಾಹುಲ್ ಗಾಂಧಿ, "ನಿನ್ನೆ ಅಮಾಯಕ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಸರ್ಕಾರದ ಬಳಿ ಉತ್ತರ ಕೇಳಲು ನಾವು ಪ್ರಧಾನಿ ನಿವಾಸದತ್ತ ಮೆರವಣಿಗೆ ನಡೆಸಿದೆವು. ಆದರೆ ಸರ್ಕಾರ ಯಾವುದೇ ಜವಾಬ್ದಾರಿ ವಹಿಸಿಕೊಳ್ಳಲು ಅಥವಾ ಸಂಸತ್ತಿನಲ್ಲಿ ಚರ್ಚಿಸಲು ಸಿದ್ಧವಿಲ್ಲ. ದೇಶದ ಯುವಕರ ಭವಿಷ್ಯವನ್ನು ಹಾಳುಗೆಡವಿರುವ ಪ್ರಧಾನಿ ಮೋದಿ ಹಾಗೂ ಗೃಹ ಸಚಿವರು ತಮ್ಮ ಹುದ್ದೆಗಳಿಗೆ ತಕ್ಷಣ ರಾಜೀನಾಮೆ ನೀಡಬೇಕು" ಎಂದು ಒತ್ತಾಯಿಸಿದರು.

ಸಂಸತ್ತಿನಲ್ಲಿ ಸ್ಪೀಕರ್ ನಡೆಗೆ ಲೇವಡಿ:

ಇದಕ್ಕೂ ಮುನ್ನ ಸಂಸತ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಹುಲ್, "ಬೆಳಿಗ್ಗೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ವಿದ್ಯಾರ್ಥಿಗಳ ಸಮಸ್ಯೆಯ ಕುರಿತು  ಚರ್ಚೆಗೆ ಅವಕಾಶ ಕೋರಿದ್ದೆವು. ಆದರೆ ಅವರು ಸರ್ಕಾರದಿಂದ ಅನುಮತಿ ಪಡೆಯುವಂತೆ ಹೇಳುತ್ತಿದ್ದಾರೆ. ಚರ್ಚೆ ನಡೆಸಲು ಪ್ರತಿಪಕ್ಷಗಳು ಸರ್ಕಾರದ ಅನುಮತಿ ಕೇಳಬೇಕು ಎನ್ನುವುದು ಹಾಸ್ಯಾಸ್ಪದ" ಎಂದು ವ್ಯಂಗ್ಯವಾಡಿದರು.

"ವಿದ್ಯಾರ್ಥಿಗಳನ್ನು ಸಾರ್ವಜನಿಕವಾಗಿ ಥಳಿಸುವುದು ಭಾರತೀಯ ಸಂಸ್ಕೃತಿಯಲ್ಲ. ನಿನ್ನೆ ನಡೆದ ಘಟನೆಗೆ ಪ್ರಧಾನಿ ಮೋದಿ ಈವರೆಗೂ ಕ್ಷಮೆಯಾಚಿಸಿಲ್ಲ. ದೇಶದ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ ಎಂಬುದು ಇಡೀ ದೇಶಕ್ಕೆ ಗೊತ್ತಿದೆ" ಎಂದು ಅವರು ಕಿಡಿಕಾರಿದರು.

ಪ್ರತಿಭಟನೆಗೆ ಮೂಲ ಕಾರಣವೇನು?:

ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾದ ಸೋಮವಾರದಂದು, ದೇಶದ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಯುವಕರು ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಭಾರಿ ಪ್ರಮಾಣದ ಲಾಠಿಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿ ಚದುರಿಸಿದ್ದರು. ಈ ದೌರ್ಜನ್ಯದ ವಿರುದ್ಧವೇ ಈಗ ಕಾಂಗ್ರೆಸ್ ಬೃಹತ್ ಮಟ್ಟದಲ್ಲಿ ನಾಯಕರೊಂದಿಗೆ ರಸ್ತೆಗಿಳಿದು ಹೋರಾಟ ತೀವ್ರಗೊಳಿಸಿದೆ.